ನವದೆಹಲಿ: ಬೆಂಗಳೂರು ಹೊರವಲಯದಲ್ಲಿ ಜುಲೈ 2ರಂದು ಕ್ವಾರಿಯಲ್ಲಿ ಬೃಹತ್ ಗ್ರಾನೈಟ್ ಬಂಡೆ ಕುಸಿದು ಏಳು ವಲಸೆ ಕಾರ್ಮಿಕರು ಸಾವನ್ನಪ್ಪಿ, ಐವರು ಗಾಯಗೊಂಡ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ.
ಭಾನುವಾರ ಪ್ರಕಟಿಸಿದ ಹೇಳಿಕೆಯಲ್ಲಿ, ಕ್ವಾರಿ ಮಾಲೀಕರ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂಬ ವರದಿಗಳು ನಿಜವಾಗಿದ್ದರೆ, ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಲಿದೆ ಎಂದು ಆಯೋಗ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿರುವ NHRC, ಎರಡು ವಾರಗಳೊಳಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದೆ.
ಆಯೋಗದ ಪ್ರಕಾರ, ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಗ್ರಾನೈಟ್ ಬಂಡೆ ಕಾರ್ಮಿಕರ ಮೇಲೆ ಕುಸಿದು ಏಳು ಮಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಅಪಘಾತ ನಡೆದ ಪ್ರದೇಶದಲ್ಲಿ ಎರಡು ಕಲ್ಲು ಕ್ರಷರ್ಗಳು ಕಾರ್ಯನಿರ್ವಹಿಸುತ್ತಿದ್ದವು ಎನ್ನಲಾಗಿದೆ.

ರಾಜ್ಯ ಸರ್ಕಾರ ಸಲ್ಲಿಸುವ ವರದಿಯಲ್ಲಿ ಘಟನೆಯ ತನಿಖೆಯ ಪ್ರಗತಿ, ಅಪಘಾತಕ್ಕೆ ಕಾರಣಗಳು ಹಾಗೂ ಜವಾಬ್ದಾರರ ವಿರುದ್ಧ ಕೈಗೊಂಡಿರುವ ಕ್ರಮಗಳ ವಿವರ ಇರಬೇಕು ಎಂದು NHRC ತಿಳಿಸಿದೆ.
ಈ ದುರಂತದ ಬಳಿಕ ಕ್ವಾರಿ ಪ್ರದೇಶಗಳಲ್ಲಿನ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿವಿಧ ರಾಜಕೀಯ ನಾಯಕರು ಮತ್ತು ಸಂಘಟನೆಗಳು ಆಗ್ರಹಿಸಿವೆ.
