ಬೆಂಗಳೂರು: ಕಾಂಗ್ರೆಸ್ ಪಕ್ಷದ ‘ಸಂಘಟನ್ ಸೃಜನ್’ ಅಭಿಯಾನದ ಅಂಗವಾಗಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಆಗಸ್ಟ್ 8ರಿಂದ 15ರವರೆಗೆ 17 ಬ್ಲಾಕ್ ಮಟ್ಟದ ಸಭೆಗಳು ನಡೆಯಲಿವೆ ಎಂದು ಎಐಸಿಸಿ ವೀಕ್ಷಕ ಚಾಂಡಿ ಓಮನ್ ತಿಳಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನೇಕಲ್, ಸರ್ಜಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಉತ್ತರಹಳ್ಳಿ, ಗೊಟ್ಟಿಗೆರೆ, ಬೇಗೂರು, ಜಿಗಣಿ, ಬನಶಂಕರಿ, ಬೊಮ್ಮನಹಳ್ಳಿ, ಬಿಟಿಎಂ, ಕೋರಮಂಗಲ, ಜಯನಗರ, ಜೆ.ಪಿ.ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಭೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಕಾರ್ಯಕರ್ತರು ನೀಡುವ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ಗೆ ಹೆಸರುಗಳನ್ನು ಶಿಫಾರಸು ಮಾಡಲಾಗುತ್ತದೆ. ತಳಮಟ್ಟದ ನಾಯಕತ್ವವನ್ನು ಬೆಳೆಸಿ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶವಾಗಿದ್ದು, ಇದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ನಡೆಯುತ್ತಿದೆ ಎಂದು ಹೇಳಿದರು.

ದೇಶದ ಬಹುತೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ಹಾಗೂ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗ ಅಭಿಯಾನ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಅಧ್ಯಕ್ಷರು ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲೂ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಕಾಂಗ್ರೆಸ್ಗೆ ದೇಶದ ರಾಜಕೀಯದಲ್ಲಿ ಮಹತ್ವದ ಸ್ಥಾನವಿದ್ದು, 2023ರ ವಿಧಾನಸಭೆ ಚುನಾವಣೆಯ ಗೆಲುವು ಪಕ್ಷಕ್ಕೆ ಹೊಸ ಶಕ್ತಿ ನೀಡಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಬಲಪಡಿಸುವುದು ಅಗತ್ಯವಾಗಿದೆ ಎಂದು ಚಾಂಡಿ ಓಮನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್, ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್, ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಓ. ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ರಾಜಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
