ನಾಗೇಂದ್ರ ರಾಜೀನಾಮೆ ಸಾಕಾಗಲ್ಲ; ನ್ಯಾಯ ಇನ್ನಷ್ಟೇ ಸಿಗಬೇಕಿದೆ: ಬಿಜೆಪಿ

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರ ರಾಜೀನಾಮೆ ಸಾಕಾಗುವುದಿಲ್ಲ. ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ಬಿಜೆಪಿ ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ತನ್ನ ನಿರಂತರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ಆದರೆ ನಾಗೇಂದ್ರ ಅವರ ರಾಜೀನಾಮೆಯಿಂದ ಹೋರಾಟ ಅಂತ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

₹187 ಕೋಟಿ ವಾಪಸ್ ನೀಡಲು ಆಗ್ರಹ

ಪರಿಶಿಷ್ಟ ಪಂಗಡ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ತಕ್ಷಣ ಸರಿಪಡಿಸಬೇಕು. ದುರುಪಯೋಗವಾಗಿರುವ ₹187 ಕೋಟಿ ಹಣವನ್ನು ಕೂಡಲೇ ವಾಲ್ಮೀಕಿ ನಿಗಮಕ್ಕೆ ವಾಪಸ್‌ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಇದರ ಜತೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ತಕ್ಷಣ ಮರುಜಾರಿ ಮಾಡಬೇಕು ಎಂದು ಒತ್ತಾಯಿಸಿದೆ.

‘‘ಪರಿಶಿಷ್ಟ ಪಂಗಡದ ಹಕ್ಕುಗಳಿಗಾಗಿ ಹಾಗೂ ಸಮುದಾಯಕ್ಕೆ ನ್ಯಾಯ ದೊರೆಯುವವರೆಗೂ ನಮ್ಮ ಸಮರ ನಿರಂತರ’’ ಎಂದು ಬಿಜೆಪಿ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ.